ಬೆಂಗಳೂರು, ಅಕ್ಟೋಬರ್ 29: ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ತಾನು ನೀಡಿದ್ದ ವಾಗ್ದಾನದಂತೆ ಸಾವಿರ ಕೋಟಿ ರುಪಾಯಿ ಪೈಕಿ ಗುರುವಾರ 500 ಕೋಟಿ ರು. ಬಿಡುಗಡೆ ಮಾಡಿದೆ. ಸುದ್ದಿಗಾರರಿಗೆ ಈ ಮಾಹಿತಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮೊದಲ ಕಂತಾಗಿ ಈ ಹಣ ಬಂದಿದೆ ಎಂದರು.
2 ರಂದು ಚಿದಂಬರಂ: ನೆರೆಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ‘ಆಸರೆ’ ಒದಗಿಸಲು ನವೆಂಬರ್ ೨ ರಂದು ರಾಜ್ಯ ಸರ್ಕಾರ ಬಾಗಲಕೋಟೆ ಬಳಿ ಈ ಕಾಮಗಾರಿಗೆ ಅಡಿಗಲ್ಲು ಹಾಕಲಿದೆ.
ಅಂದು ಬಾಗಲಕೋಟೆ ಜಿಲ್ಲೆ ಪಟ್ಟದಕಲ್ಲು ಬಳಿಯ ಶಿರಬಡಗಿ ಗ್ರಾಮದಲ್ಲಿ ಮನೆಗಳ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಚಿದಂಬರಂ ಅವರು ತಮಗೆ ಪತ್ರ ಬರೆದಿದ್ದಾರೆ ಎಂದು ಸಿಎಂ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರು ತಮಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ ಯಡಿಯೂರಪ್ಪ, ನವೆಂಬರ್ 1 ರಂದು ಆದಿ ಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ರೋಣದ ಅವರಗೋಳ ಮತ್ತು ಕುರುವಿನಕೊಪ್ಪ ಗ್ರಾಮಗಳಲ್ಲಿ ಮಠದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಮನೆಗಳ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲೂ ತಾವು ಪಾಲ್ಗೊಳ್ಳುವುದಾಗಿ ತಿಳಿಸಿದರು. ಉತ್ತರ ಕರ್ನಾಟಕದ ನೆರೆ ಪೀಡಿತ ೨೨೦ ಕ್ಕೂ ಹೆಚ್ಚು ಗ್ರಾಮಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ. ಸುಮಾರು ಲಕ್ಷ ಮನೆಗಳನ್ನು ನಿರ್ಮಿಸಿಕೊಡಲು ಮಠಮಾನ್ಯಗಳು, ಸ್ವಯಂಸೇವಾ ಸಂಸ್ಥೆಗಳು ಮುಂದೆ ಬಂದಿವೆ ಎಂದು ಹೇಳಿದ ಅವರು, ಈ ಮನೆಗಳ ನಿರ್ಮಾಣಕ್ಕೆ ತಿಂಗಳಲ್ಲಿ ಶಂಕುಸ್ಥಾಪನೆ ಮಾಡುವುದಾಗಿ ಹೇಳಿದರು.
ಸೌಜನ್ಯ: ಕನ್ನಡಪ್ರಭ