ಬೆಂಗಳೂರು,17 : 2009-10ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಗುರುವಾರ, ಮಾರ್ಚ್ 18ರಿಂದ ಬುಧವಾರ ಮಾರ್ಚ್ 31ರವರೆಗೆ ನಡೆಯಲಿವೆ.
ರಾಜ್ಯಾದ್ಯಂತ ನಡೆಯಲಿರುವ ಪರೀಕ್ಷೆ ಸುಮಾರು ಆರುವರೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸಲಿದೆ. ರಾಜ್ಯದಲ್ಲಿ ಒಟ್ಟು 907 ಕೇಂದ್ರಗಳಿದ್ದು, ಅವುಗಳಲ್ಲಿ 52 ಸೂಕ್ಷ್ಮ ಮತ್ತು 19 ಅತಿಸೂಕ್ಷ್ಮ ಕೇಂದ್ರಗಳೆಂದು ಗುರುತಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ನಕಲು ತಡೆಗಟ್ಟಲು ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಪಿಯು ಮಂಡಳಿ ಹೇಳಿದೆ. ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಆದೇಶ ನೀಡಲಾಗಿದೆ.
ಅತಂತ್ರ ಸ್ಥಿತಿಯಲ್ಲಿ ವಿದ್ಯಾರ್ಥಿಗಳು : ಈ ಮಧ್ಯೆ, ಪ್ರಾಚಾರ್ಯರ ನಿರ್ಲಕ್ಷತನದಿಂದ ಬೆಂಗಳೂರಿನ ಮೇವಾ ಕಾಲೇಜಿನ ಸುಮಾರು 109 ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಸಿಗದಿರುವುದು ಬೆಳಕಿಗೆ ಬಂದಿದೆ. ಪ್ರವೇಶ ಪತ್ರ ವಂಚಿತ ವಿದ್ಯಾರ್ಥಿಗಳ ಭವಿಷ್ಯ ತೂಗೂಯ್ಯಾಲೆಯಲ್ಲಿದೆ.
ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಸಿಗದಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ, 109 ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ದೊರೆಯದಿರುವ ಬಗ್ಗೆ ತಿಳಿದುಬಂದಿದೆ. ಇದು ವಿದ್ಯಾರ್ಥಿಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ನಿರ್ಲಕ್ಷತನದಿಂದ ಆಗಿದೆ. ಆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಾಳೆ ಪರೀಕ್ಷೆ ಆರಂಭವಾಗಲಿದ್ದು ವಿದ್ಯಾರ್ಥಿಗಳ ಸಂಖ್ಯಾನುಗುಣವಾಗಿ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಈಗಾಗಲೇ ರವಾನಿಸಲಾಗಿದೆ. ಇದೀಗ ಪ್ರವೇಶ ಪತ್ರ ಸಿಗದಿರುವ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕೂಡಿಸಬೇಕು ಎಂಬ ಪ್ರಯತ್ನ ನಡೆದಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ನಮ್ಮ ಎಲ್ಲ ಪ್ರಯತ್ನವನ್ನು ಮಾಡುವುದಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವಾ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದರು.