ಚಿಕ್ಕಬಳ್ಳಾಪುರ, ನವೆಂಬರ್ ೩೦: ಚಿಂತಾಮಣಿ ತಾಲ್ಲೂಕಿನ ಡಾ|| ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತವಾದ ಮೂಲಭೂತ ಸೌಲಭ್ಯಗಳನ್ನು ನೀಡದೆ ಇರುವ ಬಗ್ಗೆ ವಿದ್ಯಾರ್ಥಿಗಳು ನೀಡಿದ ದೂರನ್ನು ತೀವ್ರವಾಗಿ ಪರಿಶೀಲಿಸಿದ ನಂತರ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಶ್ರೀಮತಿ ಮುನಿಯಮ್ಮ ಹಾಗೂ ವಸತಿ ನಿಲಯದ ವಾರ್ಡನ್ ವೆಂಕಟಮುನಿಯಪ್ಪರವರನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಕ್ಫ್ ಮತ್ತು ಅಲ್ಪಸಂಖ್ಯಾತರ ಖಾತೆ ಸಚಿವ ಡಾ. ಮುಮ್ತಾಜ್ ಅಲಿ ಖಾನ್ ತಿಳಿಸಿದರು.
ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ವಸತಿ ನಿಲಯಗಳಲ್ಲಿ ಬಾರಿ ಅನ್ಯಾಯಗಳು ಮತ್ತು ಅವ್ಯವಹಾರಗಳು ನಡೆಯುತ್ತಿದ್ದು ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯಗಳು ದೊರೆಯುತ್ತಿಲ್ಲವೆಂದರು.
ಚಿಂತಾಮಣಿ ಡಾ|| ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿ ನಿಲಯದಲ್ಲಿ ಬಳಸುತ್ತಿದ್ದ ತರಕಾರಿ ಕೊಳತು ನಾರುತಿತ್ತು. ಅಡುಗೆ ಮನೆ ದುರುವಾಸನೆಯಿಂದ ಕೂಡಿತ್ತು, ವಿದ್ಯಾರ್ಥಿಗಳಿಗೆ ಮಲಗಲು ಮಂಚಾ, ಕಂಬಳಿ, ಬೆಡ್ಡ್ಶೀಟ್ಟಗಳನ್ನು ನೀಡಿಲ್ಲ ಮಲಗಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಗಮನ ಅರಿಸಿಲ್ಲದೆ ಇರುವುದು ಗಮನಕ್ಕೆ ಬಂದಿತು.
ಜಿಲ್ಲೆಯ ವಸತಿ ನಿಲಯಗಳಲ್ಲಿ ಹಣವನ್ನು ದೋಚುತ್ತಿದ್ದಾರೆ ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆಂದರು. ಇದಕ್ಕೆ ಕಡಿವಾಣ ಹಾಕಲು ಪ್ರತ್ಯೇಕ ತಂಡ ರಚಿಸಲಾಗುವುದೆಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್ ಕೃಷ್ಣಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಎಸ್.ನಾಯಕ್ ಹಾಜರಿದ್ದರು.