ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಕ್ಕಳಿಗೆ ಬಾಲ್ಯ ಅನುಭವಿಸಲುಅವಕಾಶ ಒದಗಿಸಬೇಕು : ನ್ಯಾ.ಮಾಯಣ್ಣ

ಮಕ್ಕಳಿಗೆ ಬಾಲ್ಯ ಅನುಭವಿಸಲುಅವಕಾಶ ಒದಗಿಸಬೇಕು : ನ್ಯಾ.ಮಾಯಣ್ಣ

Thu, 13 Jun 2024 02:22:41  Office Staff   SOnews

 

ಕಾರವಾರ: ಮಕ್ಕಳು ತಮ್ಮ ಶಿಕ್ಷಣದೊಂದಿಗೆ ಬಾಲ್ಯವನ್ನು ಆನಂದಿಸಲು ಅಗತ್ಯವಿರುವ ಎಲ್ಲಾ ಅವಕಾಶಗಳನ್ನು ಒದಗಿಸುವ ಮೂಲಕ, ಅವರು ಬಾಲ ಕಾರ್ಮಿಕ ಪದ್ದತಿಗೆ ಒಳಗಾಗದಂತೆ ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಹೇಳಿದರು.

ಅವರು ಬುಧವಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ(ರಿ), ಬಾಲಮಂದಿರ ಹೈಸ್ಕೂಲ್ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಮಂದಿರ ಹೈಸ್ಕೂಲ್(ಹಿಂದೂ ಹೈಸ್ಕೂಲ್) ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲ ಕಾರ್ಮಿಕ ಪದ್ದತಿ ಒಂದು ಅನಿಷ್ಠ ಪದ್ದತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಬಗ್ಗೆ ಪೋಷಕರು ಹಾಗು ಎಲ್ಲಾ ಉದ್ದಿಮೆದಾರರು ಜಾಗೃತರಾಗುವುದು ಅತ್ಯಗತ್ಯ. ಬಾಲ ಕಾರ್ಮಿಕ ಪದ್ದತಿಗೆ ಪೋಷಕರ ಬಡತನ ಮತ್ತು ಅನಕ್ಷರತೆಯೇ ಮುಖ್ಯ ಕಾರಣವಾಗಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಶಾಲೆ ಬಿಟ್ಟ ಮಕ್ಕಳು ಮತ್ತು ಉದ್ದಿಮೆಗಳಲ್ಲಿ ದುಡಿಯುತ್ತಿರುವ ಮಕ್ಕಳು ಕಂಡು ಬಂದಲ್ಲಿ ತಕ್ಷಣ ಉಚಿತ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗೆ ಮಾಹಿತಿ ನೀಡುವ ಮೂಲಕ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಸಹಕರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಪದ್ದತಿ ವಿರೋಧದ ಕುರಿತು ಪ್ರಮಾಣ ವಚನ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ದವಾಗಿದ್ದು, ಕಡ್ಡಾಯ ಶಿಕ್ಷಣ, ಉಚಿತ ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾದ ಹಲವು ಸೇವೆಗಳನ್ನು ನೀಡುತ್ತಿದೆ. ಬಾಲ ಕಾರ್ಮಿಕ ಪದ್ದತಿಗೆ ಬಡತನ ಮೂಲ ಕಾರಣವಾಗಿದ್ದು, ಕೂಲಿ ಕಾರ್ಮಿಕರು ಕಟ್ಟಡ ಕಾರ್ಮಿಕರಾಗಿ ನೊಂದಣಿ ಮಾಡಿಕೊಳ್ಳುವ ಮೂಲಕ ಸರ್ಕಾರದಿಂದ ಹಲವು ರೀತಿಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ತಮ್ಮ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ವಿದ್ಯಾಥಿವೇತನ, ಕೌಶಲ್ಯ ತರಬೇತಿಗಳು ಹಾಗೂ ಉದ್ಯೋಗವಕಾಶಗಳ ಸೌಲಭ್ಯ ಪಡೆಯಬಹುದಾಗಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ದಿಮೆದಾರರಿಗೆ ರೂ.50,000 ಗಳ ವರೆಗೆ ದಂಡ ಹಾಗೂ 2 ವರ್ಷಗಳ ವರೆಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದ್ದು, ಬಗ್ಗೆ ವ್ಯಾಪಕ ಜಾಗೃತಿ ಮತ್ತು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಪೂರಕ ವಾತಾವಾರಣ ನಿರ್ಮಿಸಿ, ಜಿಲ್ಲೆಯನ್ನು ಬಾಲ ಕಾಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಮಹತ್ವದ ಜವಾಬ್ದಾರಿ ಎಲ್ಲಾ ಇಲಾಖೆಗಳ ಮೇಲಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹಬೀಬಸಾಬ್ ಮುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಡಿ.ವೈ.ಎಸ್ಪಿ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಗಿರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕಿ ಹೆಚ್.ಹೆಚ್. ಕುಕನೂರು, ಡಿಡಿಪಿಐ ಲತಾ ನಾಯಕ್, ನಗರಸಭೆ ಪೌರಾಯುಕ್ತ ರವಿಕುಮಾರ್, ಬಾಲ ಮಂದಿರ ಹೈಸ್ಕೂಲ್ ಪ್ರಾಂಶುಪಾಲೆ ಅಂಜಲಿ ಎಸ್ ಮಾನೆ ಉಪಸ್ಥಿತರಿದ್ದರು.

 ಬಾಲ ಮಂದಿರ ಹೈಸ್ಕೂಲ್ ಶಿಕ್ಷಕಿ ಕಾಂಚನಾ ನಾಯ್ಕ್ ಸ್ವಾಗತಿಸಿದರು.

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬಾಲಮಂದಿರ ಹೈಸ್ಕೂಲ್ ವರೆಗೆ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಚಾಲನೆ ನೀಡಿದರು.

 


Share: