ಬೆಂಗಳೂರು,ಏ,೨೬: ಭಾರತೀಯ ವಿಜ್ಞಾನ ಮಂದಿರದ ಚಿತ್ರದುರ್ಗ ಶಾಖೆಯನ್ನು ನೆರೆಯ ಆಂಧ್ರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂಬ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಳ್ಳಿ ಹಾಕಿದ್ದಾರೆ.
ರಾಜಭವನದಲ್ಲಿ ಏರ್ಪಡಿಸಿದ್ದ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದ ಭಾರತೀಯ ವಿಜ್ಞಾನ ಮಂದಿರದ ಶಾಖೆಯ ಕಾಮಗಾರಿ ಪ್ರಗತಿಯಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕಳೆದ ಎರಡು ವರ್ಷಗಳ ಹಿಂದೆಯೇ ಅನುಮೋದನೆ ನೀಡಿದ್ದು, ಇದಕ್ಕಾಗಿ ಬೇಕಾಗುವ ಜಮೀನನ್ನು ಸಹ ಭಾರತೀಯ ವಿಜ್ಞಾನ ಮಂದಿರಕ್ಕೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಈ ಕುರಿತು ರಾಜ್ಯಕ್ಕೆ ಯಾವುದೇ ಪತ್ರ ಬಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಂಡಿದ್ದರೂ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗಿಲ್ಲ ಎಂದರು.
ಕುಡಿಯುವ ನೀರು ಒದಗಿಸಲು ಸರ್ಕಾರ ಈಗಾಗಲೇ ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಿದ್ದು, ವಿದ್ಯುತ್ ತೊಂದರೆಯಿಂದ ಸರಬರಾಜು ಮಾಡಲು ತೊಂದರೆಯಾದಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮಾಡುವಂತೆ ಆದೇಶಿಸಲಾಗಿದೆ.ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಕಡೆ ಮಳೆ ಬಿದ್ದಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಬೃಹದಾಕಾರವಾಗಿ ಎಲ್ಲಿಯು ಕಂಡು ಬಂದಿಲ್ಲ ಎಂದು ತಿಳಿಸಿದರು.