ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಹಾಲಪ್ಪ ಪ್ರಕರಣ : ಸಿಎಂ ರಾಜೀನಾಮೆಗೆ ಕಾಂಗ್ರೇಸ್ ಪಟ್ಟು

ಹಾಲಪ್ಪ ಪ್ರಕರಣ : ಸಿಎಂ ರಾಜೀನಾಮೆಗೆ ಕಾಂಗ್ರೇಸ್ ಪಟ್ಟು

Mon, 03 May 2010 15:42:00  Office Staff   S.O. News Service
ಬೆಂಗಳೂರು, ಮೇ. 3 : ಅತ್ಯಾಚಾರ ಪ್ರಕರಣದ ಆರೋಪ ಎದುರಿಸುತ್ತಿರುವ ಹರತಾಳು ಹಾಲಪ್ಪ ಅವರನ್ನು ಕೂಡಲೇ ಬಂಧಿಸಬೇಕು. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಆಗ್ರಹಿಸಿ ಕಾಂಗ್ರೇಸ್ ಪಕ್ಷ ನಗರದ ಎಂಜಿ ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಒಂದು ದಿನದ ಪ್ರತಿಭಟನೆ ಆರಂಭಿಸಿದೆ. 

ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಇಂದು ಬೆಳಗ್ಗೆ ಆರಂಭವಾಗಿದ್ದು, ಸಂಜೆವರೆಗೆ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದು, ಸರಕಾರ ಮತ್ತು ಹರತಾಳು ಹಾಲಪ್ಪ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. 

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಸಚಿವರೊಬ್ಬರು ಮಾನಭಂಗ ಮಾಡಲೆತ್ನಿಸಿದರೂ ಅವರನ್ನು ಬಂಧಿಸುವುದಿರಲಿ, ಈ ಬಗ್ಗೆ ಮೃದುಧೋರಣೆ ತಳೆದಿದ್ದಾರೆ. ಜೊತೆಗೆ ಪ್ರಮಾಣ ಪತ್ರ ಕೊಟ್ಟಿರುವುದು ಅತ್ಯಂತ ಖಂಡನೀಯ ವಿಷಯವಾಗಿದೆ. 

ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಕೂಡಲೇ ಹಾಲಪ್ಪ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಅತ್ಯಾಚಾರ ಪ್ರಕರಣದಡಿ ಅವರನ್ನು ಬಂಧಿಸಬೇಕು. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.

 

  

Share: