ಕಾರವಾರ: ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಜಾಥಾಕ್ಕೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಚಾಲನೆ ನೀಡಿದರು.
ಜಾಥಾದಲ್ಲಿ ವಿಶೇಷಚೇತನರು, ಮಹಿಳೆಯರ ಪೂರ್ಣಕುಂಭ ಸ್ವಾಗತ, ಕಾಲೇಜು ವಿದ್ಯಾರ್ಥಿಗಳು, ಕಲಾತಂಡಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಈ ಜಾಥಾವು ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳ ಸರ್ಕಲ್ಗಳಲ್ಲಿ ಮತದಾನದ ಕುರಿತು ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಂಗೋಲಿ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಸಂಜೆ ರವೀಂದ್ರನಾಥ ಠಾಗೂರ್ ಕಡಲತೀರದ ಮಯೂರ ವರ್ಮ ವೇದಿಕೆಯಲ್ಲಿ ಬೀದಿ ನಾಟಕ, ಜಾನಪದ ಗೀತೆ, ರಸಮಂಜರಿ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ರಾಯ್ಕರ್, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಉಪ ವಿಭಾಗಾಧಿಕಾರಿ ಕನಿಷ್ಕ ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.