ಹಾಸನ, ಡಿಸೆಂಬರ್ 11: ಹಾಸನ ಜಿಲ್ಲಾ ಪೊಲೀಸರ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ದೊರೆತಿದೆ.
ಹಾಸನ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟವನ್ನು ದಕ್ಷಿಣ ವಲಯ ಪೊಲೀಸ್ ಮಹಾ ನಿರ್ದೇಶಕ ಜಿ.ವಿ.ಗಾಂವ್ಕರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಗಾಂವ್ಕರ್, ಪೊಲೀಸರು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳುವುದು ಅತಿಮುಖ್ಯ. ಕ್ರೀಡೆ ಮನಷ್ಯನ ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡಲು ಪೂರಕವಾಗಿದೆ ಎಂದರು.
ಕ್ರೀಡೆಯನ್ನು ದೈನಂದಿನ ಚಟುವಟಿಕೆಯೊಂದಿಗೆ ಮೈಗೂಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಪೊಲೀಸರು ಕ್ರೀಡಾಮನೋಭಾವದಿಂದ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿರುವ ೬ ತಂಡಗಳು ಪಾಲ್ಗೊಂಡಿದ್ದು, ಸದಾ ಕರ್ತವ್ಯದ ಒತ್ತಡದಲ್ಲಿರುವ ಹಗ್ಗಾಜಗ್ಗಾಟ, ರೈಫಲ್ ಶೂಟಿಂಗ್, ಕ್ರಿಕೆಟ್ ಸೇರಿದಂತೆ ವಿವಿಧ ಆಟೋಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಇದಕ್ಕೂ ಮುನ್ನ ಪೊಲೀಸರು ಆಕರ್ಷಕ ಪಥ ಸಂಚಲನ ನಡೆಸಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ.ಶರತ್ಚಂದ್ರ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಯಲ್ಲಪ್ಪ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.