ಬೆಂಗಳೂರು, ಜನವರಿ 21:ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಕುಡಿಯುವ ನೀರು ಹಾಗೂ ಅಂತರ್ಜಲ ಕುಸಿತದ ಸಮಸ್ಯೆ ಎದುರಿಸುತ್ತಿರುವ ಬಯಲು ಸೀಮೆಯ ಜಿಲ್ಲೆಗಳಿಗೆ ಸೀಮಿತವಾಗಿ ಅನುಕೂಲವಾಗುವಂತೆ ಶೀಘ್ರ ಹೊಸ ಯೋಜನೆ ರೂಪಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಮಸ್ಯಾತ್ಮಕ ಜಿಲ್ಲೆಗಳಿಗೆ ಕುಡಿಯುವ ನೀರು ಸೇರಿದಂತೆ ನೀರಾವರಿ ಸೌಲಭ್ಯ ಒದಗಿಸುವ ಬಗ್ಗೆ ಸರಕಾರ ಗಂಭೀರ ಚಿಂತನೆ ನಡೆಸಿದೆ. ಅದಕ್ಕಾಗಿ ಸಾಧ್ಯಸಾಧ್ಯತೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಕೆಜಿಎಫ್ ಶಾಸಕ ಸಂಪಂಗಿ ನೇತೃತ್ವದ ಕೋಲಾರ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ನಾನಾ ಸಂಘಟನೆಗಳ ಪದಾಧಿಕಾರಿಗಳ ನಿಯೋಗಕ್ಕೆ ಅವರು ಈ ಆಶ್ವಾಸನೆ ನೀಡಿದರು.
ನೇತ್ರಾವತಿ ನದಿ ತಿರುವು ಯೋಜನೆ ಮೂಲಕ ಬಯಲುಸೀಮೆ ಜಿಲ್ಲೆಗಳಿಗೆ ನೀರು ಹರಿಸಬಹುದು ಎಂದು ನೀರಾವರಿ ತಜ್ಞ ಪರಮಶಿವಯ್ಯ ಅವರು ವರದಿ ನೀಡಿದ್ದಾರೆ. ಜತೆಗೆ ಬೇರೆ ಮಾರ್ಗಗಳ ಬಗ್ಗೆಯೂ ಸರಕಾರ ಆಲೋಚಿಸುತ್ತಿದೆ. ಉನ್ನತ ಮಟ್ಟದ ತಾಂತ್ರಿಕ ಸಮಿತಿಯೊಂದನ್ನು ರಚಿಸಿ ಕಾರ್ಯಸಾಧುವಾದ ಯೋಜನೆಯ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದರು.
ಭಾರತೀಯ ಕಿಸಾನ್ ಸಂಘದ ಕೋಲಾರ ತಾಲೂಕು ಅಧ್ಯಕ್ಷ ತ್ಯಾಗರಾಜು, ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುನಿರತ್ನಂನಾಯ್ಡು, ಬಿಜೆಪಿ ಮುಖಂಡರಾದ ಚಲಪತಿ, ಜಯಶಂಕರ್, ಪದ್ಮನಾಭ, ಮುನಿವೆಂಕಟಪ್ಪ ನಿಯೋಗದಲ್ಲಿದ್ದರು.