ಸಕಲೇಶಪುರ: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾದ ಪರಿಣಾಮ ರಸ್ತೆ ಬಂದ್ ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಸಮೀಪ ಭೂಕುಸಿತ ಉಂಟಾಗಿ ಎರಡು ಕಾರು, ಒಂದು ಟಿಪ್ಪರ್ ಹಾಗೂ ಒಂದು ಟ್ಯಾಂಕರ್ ಕೆಸರಿನಲ್ಲಿ ಸಿಲುಕಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75ನ್ನು ಬಂದ್ ಮಾಡಿದ್ದರಿಂದ ಸಂಚಾರ ಅಡಚಣೆ ಉಂಟಾಗಿದ್ದು, ಊಟ ತಿಂಡಿ ಇಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ನಿರಂತರ ಮಳೆ ಸುರಿಯುತ್ತಿದ್ದರೂ ಶಾಲೆಗಳಿಗೆ ರಜೆ ನೀಡದ ಜಿಲ್ಲಾಧಿಕಾರಿ ನಡೆಯ ಬಗ್ಗೆ ಶಾಸಕ ಸಿಮೆಂಟ್ ಮಂಜುನಾಥ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಶಾಲಾ ಮಕ್ಕಳಿಗೆ ತೊಂದರೆಯಾದರೆ ಜಿಲ್ಲಾಧಿಕಾರಿ ನೇರ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸಕಲೇಶಪುರ ತಾಲೂಕಿನಾದ್ಯಂತ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಜನರ ಜೀವನ ಅಸ್ತವ್ಯಸ್ತವಾಗಿದೆ. ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು 75 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಹೇಳಲಾಗಿದೆ.